ಬೆಂಗಳೂರು : ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ ಅಥವಾ ಅಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿಲ್ಲ. ಇದು ಪೋಲೀಸರು ನೀಡಿದ ಸ್ಪಷ್ಟನೆ .
ನಗರದ ನಗರತಪೇಟೆಯಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ತಕ್ಷಣ ಬಿಜೆಪಿಯ ಸಂಸತ್ ಸದಸ್ಯರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್ ಈ ವಿಚಾರವನ್ನು ಕೈಗೆತ್ತಿಕೊಂಡು ಪ್ರತಿಭಟನೆಗೆ ಸಿದ್ದರಾಗಿದ್ದರು.
ಹಲಸೂರು ಗೇಟ್ ಠಾಣೆ ವ್ಯಾಪ್ತಿಯ ನಜರತ್ ಪೇಟೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿತ್ತು. ನಜರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ಮುಖೇಶ್ ಎಂಬುವವರು ಮೊಬೈಲ್ ಸರ್ವೀಸ್ ಅಂಗಡಿ ಹೊಂದಿದ್ದು, ಭಾನುವಾರ ಸಂಜೆ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ಆರೋಪ ಕೇಳಿಬಂದಿತ್ತು.
ಸಿಸಿಟಿವಿ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆರಿಗೆ. ಆರೋಪಿಗಳಲ್ಲಿ ಒಬ್ಬನು ಮೊದಲು ಮುಖೇಶ್ ಮೇಲೆ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಬಳಿಕ ಕೋಪಕೊಂಡ ಮುಖೇಶ್ ಕೂಡ ಅಂಗಡಿಯಿಂದ ಹೊರಹೋಗಿ ಕೈಕೈ ಮಿಲಾಯಿಸಿರುವುದು ಕಂಡು ಬಂದಿದೆ.
ಈ ನಡುವೆ ಘಟನೆ ಸಂಬಂಧ ಹಲಸೂರು ಗೇಟ್ ಪೊಲೀಸರು ಆರೋಪಿಗಳ ವಿರುದ್ಧ ಕ್ರಿಮಿನಲ್ ಬೆದರಿಕೆ (ಐಪಿಸಿ 506), ಶಾಂತಿ ಭಂಗದ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ (ಐಪಿಸಿ 504), ಕಾನೂನುಬಾಹಿರ ಸಭೆ (ಐಪಿಸಿ 149) ಮತ್ತು ಕೊಲೆ ಯತ್ನ (ಐಪಿಸಿ 307) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






