ಹಾವೇರಿ : ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 13 ಜನರು ಸಾವನ್ನಪ್ಪಿರುವ ಘಟನೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಸಂಭವಿಸಿದೆ.
17 ಜನರಿದ್ದ ಟಿಟಿಯಲ್ಲಿ 13 ಜನರು ಮೃತಪಟ್ಟಿದ್ದಾರೆ. ಬೆಳಗಾವಿ ಚಿಂಚೋಳ್ಳಿ ಮಾಯಮ್ಮ ದೇವಿ ದರ್ಶನ ಪಡೆದು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಕುಟುಂಬಸ್ಥರ ಜೊತೆ ದೇವಿಗೆ ಹೋಗಿ ಪೂಜೆ ಮಾಡಿಸಿಕೊಂಡು ಬರುವಾಗ ಈ ಘಟನೆ ಸಂಭವಿಸಿದೆ.17 ಜನರಿದ್ದ ಟಿಟಿಯಲ್ಲಿ ಸಧ್ಯಕ್ಕೆ ಅರ್ಪಿತಾ, 9 ವರ್ಷದ ಮಗು ಸೇರಿದಂತೆ ಇನ್ನಿಬ್ಬರಿಗೆ ತೀವ್ರ ಗಾಯವಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
13 ಜನರು ಸಾವನ್ನಪ್ಪಿದ್ದಾರೆ. ಮೃತರೆಲ್ಲ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಹೊಳೆಹೊನ್ನೂರು ಎಮ್ಮೆಹಟ್ಟಿ ಗ್ರಾಮದವರು ಎನ್ನಲಾಗುತ್ತಿದೆ.
ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಶುಕ್ರವಾರ ಬೆಳಗಿನ ಜಾವ ನಾಲ್ಕೂವರೆ ಗಂಟೆಗೆ ಈ ದುರ್ಘಟನೆ ನಡೆದಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
