ಪ್ರಧಾನಿ ನರೇಂದ್ರ ಮೋದಿ ಅವರದು ಸಬ್ಕಾ ವಿಕಾಸ್ ಅಲ್ಲ, ಅದು ಸಬ್ಕಾ ಸರ್ವನಾಶ್ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹಲವು ಭರವಸೆಗಳಲ್ಲಿ ಒಂದನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಶನಿವಾರ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಂದು ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, “ಮೋದಿಜಿ ಸಬ್ಕಾ ವಿಕಾಸ್ಎಂಬ ಭರವಸೆ ನೀಡಿದ್ದರು. ಆದರೆ ವಾಸ್ತವವಾಗಿ ನಡೆದದ್ದು ಸಬ್ಕಾ ಸತ್ಯನಾಶ್” ಎಂದು ಪ್ರಧಾನಿ ವಿರುದ್ಧ ಕಿಡಿ ಕಾರಿದರು.
“ವಾರ್ಷಿಕವಾಗಿ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಹಾಗಾಗಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ದೇಶದ ಹೊರಗೆ ಬಚ್ಚಿಟ್ಟಿದ್ದ ಕಪ್ಪುಹಣವನ್ನು ವಾಪಸ್ ತರುವುದಾಗಿ ಹೇಳಿದ್ದರು. ಅಲ್ಲದೆ ಪ್ರತಿಯೊಬ್ಬರಿಗೂ 15 ಲಕ್ಷ ರೂಪಾಯಿ ನೀಡಿ, 2022 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಮತ್ತು ಪ್ರತಿ ಕುಟುಂಬಕ್ಕೆ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಒಂದೇ ಒಂದು ಭರವಸೆಯನ್ನು ಅವರು ಈಡೇರಿಸಿಲ್ಲ ಎಂದರು.
ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಎಂದು ಹೇಳಿದ ಅವರು, ಬಿಜೆಪಿ ಎಂದಿಗೂ ಸ್ವಾತಂತ್ರ್ಯ ಮತ್ತು ದೇಶದ ಅಭಿವೃದ್ಧಿಗಾಗಿ ಹೋರಾಡಲಿಲ್ಲ. ಆದರೂ ಅವರು ದೇಶಪ್ರೇಮದ ಬಗ್ಗೆ ಸಾಕಷ್ಟು ಮಾತನಾಡುತ್ತಾರೆ ಎಂದರು.
ಮೋದಿ ಮುಂದೆ ನೆಹರೂ, ಇಂದಿರಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರೀ ಅವರು ಏನೂ ಅಲ್ಲ ಎನ್ನುವಷ್ಟು ಮಾತನಾಡುತ್ತಾರೆ. ಮೋದಿಜಿಯೇ ಸರ್ವಸ್ವ ಬಿಜೆಪಿ ಹೇಳುತ್ತಿದೆ ಎಂದು ಖರ್ಗೆ ವಾಗ್ದಾಳಿ ನಡೆಸಿದರು.