ನವದೆಹಲಿ : ಪಾಕ್ ಆಕ್ರಮಿತ ಕಾಶ್ಮೀರವನ್ನು ನಾವು ವಶಪಡಿಸಿಕೊಳ್ಳುವ ಅಗತ್ಯ ಇಲ್ಲ. ಅಲ್ಲಿನ ಜನರೇ ಭಾರತದ ಜೊತೆ ಸೇರಲು ಬಯಸಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಮಾತು ಹೇಳಿರುವ ಅವರು, ಭಾರತ ಎಂದೂ ಪಾಕ್ ಆಕ್ರಮಿತ ಕಾಶ್ಮೀರದ ಮೇಲಿನ ತನ್ನ ಹಕ್ಕನ್ನು ಬಿಟ್ಟುಕೊಟ್ಟಿಲ್ಲ. ಈಗ ಕಾಶ್ಮೀರದಲ್ಲಿನ ಅಭಿವೃದ್ಧಿಯನ್ನು ನೋಡಿ ಪಾಕ್ ಆಕ್ರಮಿತ ಕಾಶ್ಮೀರದ ಜನರು ಬಾರತಕ್ಕೆ ಸೇರಲು ಉತ್ಸುಕರಾಗಿದ್ದಾರೆ ಎಂದರು.
ಈಗ ಭಾರತ ಏನೂ ಮಾಡಬೇಕಾದ ಅಗತ್ಯ ಇಲ್ಲ. ಕಾಶ್ಮೀರದಲ್ಲಿನ ಪರಿಸ್ಥಿತಿ ಬದಲಾದ ರೀತಿ, ಅಲ್ಲಿ ನಡೆಯುತ್ತಿರುವ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿ ಮತ್ತು ಆಲ್ಲಿ ಶಾಂತಿ ನೆಲಸಿದ ರೀತಿ ಇಷ್ಟೇ ಸಾಕು. ಪಾಕ್ ಆಕ್ರಮಿತ ಕಾಶ್ಮೀರದ ಜನ ಭಾರತದ ಜೊತೆ ಸೇರುವ ಒತ್ತಡವನ್ನು ಹೆಚ್ಚಿಸುತ್ತಾರೆ ಎಂದು ಅವರು ಹೇಳಿದರು.
ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾಕ್ಸಿ ಯುದ್ಧ ನಡೆಸುವ ಮೂಲಕ ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಇದನ್ನು ಅದು ನಿಲ್ಲಿಸಬೇಕು. ಹಾಗೆ ಭಾರತವನ್ನು ಅಸ್ಥಿರಗೊಳಿಸಲು ನಾವು ಅವಕಾಶ ನೀಡುವುದಿಲ್ಲ ಎಂದು ರಕ್ಶಣಾ ಸಚಿವರು ಹೇಳಿದರು.
ಲಡಾಕ್ ನಲ್ಲಿನ ಗಡಿ ತಂಟೆಯ ಕುರಿತು ಅವರು ಮಾತನಾಡಿ ಚೀನಾದ ಜೊತೆ ಮಾತುಕತೆ ನಡೆಯುತ್ತಿದೆ ಎಂದರು.
.
