ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದು ಕಷ್ಟ ಸಾಧ್ಯ. ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಮಾತ್ರ ಆಅರೋಪಿಅಯ್ನ್ನು ಕರೆದು ತರಬಹುದು.
ಈ ಸತ್ಯವನ್ನು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಒಪ್ಪಿಕೊಂಡಿದ್ದಾರೆ.
ಇದೊಂದು ಸೂಕ್ಷ್ಮವಾಗಿರುವ ಪ್ರಕರಣ, ಇದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಮಾಹಿತಿಯನ್ನು ಹಂಚಿಕೊಳ್ಳುವದೂ ಸರಿಯಲ್ಲ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ ಒಂದು ದಿನದ ನಂತರ ಅಂದರೆ ಏಪ್ರಿಲ್ 27 ರಂದು ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ ಎನ್ನಲಾಗಿದೆ. ಇದಾದ ಮೇಲೆ ಅವರ ಪತ್ತೆ ಇಲ್ಲ. .
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ವಿದೇಶ ಪ್ರವಾಸ ಕೈಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಇಲ್ಲ, ಅಂತಹ ಯಾವುದೇ ಆಯ್ಕೆ ಇಲ್ಲ. ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ ಮತ್ತು ಇಂಟರ್ಪೋಲ್ ಪ್ರಜ್ವಲ್ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತದೆ. ಪ್ರಜ್ವಲ್ ಪತ್ತೆಯಾದ ಅಥವಾ ಗುರುತಿಸಲಾದ ಆಯಾ ದೇಶ ಇಂಟರ್ಪೋಲ್ಗೆ ಮಾಹಿತಿ ನೀಡುತ್ತಾರೆ ಮತ್ತು ನಂತರ ಸಿಬಿಐ ತಿಳಿದುಕೊಳ್ಳುತ್ತದೆ ಮತ್ತು ಅವರ ಮೂಲಕ ನಮಗೆ ತಿಳಿಯುತ್ತದೆ’ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತಿದೆ, ತನಿಖೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ನಾವು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಬಯಸುವುದಿಲ್ಲ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ಆರೋಪ ಮಾಡಿರುವ ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನದ ಹಿಂದೆ ಷಡ್ಯಂತ್ರವಿದೆ ಎಂಬ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, ಯಾರಾದರೂ ಏನಾದರೂ ಹೇಳಿದರೆ ಅದಕ್ಕೆ ಪ್ರತಿಕ್ರಿಯಿಸಲಾರೆವು. ಇದು ಗಂಭೀರ ಪ್ರಕರಣವಾಗಿರುವುದರಿಂದ ತನಿಖೆ ಪೂರ್ಣಗೊಳ್ಳುವವರೆಗೆ ನಾವು ಮಾಹಿತಿಯನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರುವಂತೆ ಸಾರ್ವಜನಿಕರು ಮತ್ತು ನಾಯಕರಿಗೆ ನಾನು ಮನವಿ ಮಾಡುತ್ತೇನೆ. ಇಲ್ಲದಿದ್ದರೆ, ಅವರು ನೀಡಿದ ಹೇಳಿಕೆಗಳ ಆಧಾರದ ಮೇಲೆ, ನಾವು ಅವರನ್ನು ತನಿಖೆಗೆ ಕರೆದು ಸಿಆರ್ಪಿಸಿಯ 41 ಎ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಬೇಕಾಗಬಹುದು’ ಎಂದು ಅವರು ಹೇಳಿದರು.
ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಅವರಿಗೂ ನೋಟಿಸ್ ನೀಡಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರು ಮಾಜಿ ಸಿಎಂ ಆಗಿದ್ದು, ಈ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ನಂಬಿದ್ದೇನೆ. ಈ ಪ್ರಕರಣದ ಕುರಿತು ಯಾವುದೇ ಹೇಳಿಕೆಗಳನ್ನು ನೀಡುವ ಮೊದಲು ಅಥವಾ ಸಾರ್ವಜನಿಕ ಡೊಮೇನ್ನಲ್ಲಿ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು, ಎಲ್ಲರೂ ಜಾಗರೂಕರಾಗಿರಬೇಕು ಮತ್ತು ಇದು ಎಲ್ಲರಿಗೂ ಅನ್ವಯಿಸುತ್ತದೆ ಎಂದು ಹೇಳಿದರು







