ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಲ್ಲಿದ್ದ 90 ಕೋಟಿಗೂ ಹೆಚ್ಚು ಮೊತ್ತವನ್ನು ಅಕ್ರಮವಾಗಿ ಹೈದರಾಬಾದ್ನ ಬಂಜಾರಾ ಹಿಲ್ಸ್ ಆರ್ಬಿಎಲ್ ಬ್ಯಾಂಕ್ನಲ್ಲಿರುವ ಖಾತೆಗಳಿಗೆ ವರ್ಗಾವಣೆ ಮಾಡಿರುವ ಹಗರಣದಲ್ಲಿ ಇಬ್ಬರು ಮಾಜಿ ಅಧಿಕಾರಿಗಳನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಶನಿವಾರ ಬಂಧಿಸಿದೆ.
ಹಗರಣದ ತನಿಖೆಗೆ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಷ್ ಖರ್ಬೀ ಕರ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ಶುಕ್ರವಾರ ಆದೇಶ ಹೊರಡಿಸಲಾಗಿತ್ತು. ಶನಿವಾರದಿಂದ ತನಿಖೆ ಆರಂಭಿಸಿರುವ ಎಸ್ಐಟಿ, ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರಶುರಾಮ್ ಜಿ. ದುರುಗಣ್ಣವರ್ ಅವರನ್ನು ಅವರನ್ನು ಬಂಧಿಸಿದೆ.
ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಅವರು ಬಂಧಿತ ಇಬ್ಬರು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೆಲವು ಅಧಿಕಾರಿಗಳು ಒತ್ತಡ ಹೇರಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ ಎಂದು ಆರೋಪಿಸಿ ಪತ್ರ ಬರೆದಿಟ್ಟು ಶಿವಮೊಗ್ಗದಲ್ಲಿ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಚಂದ್ರಶೇಖರನ್ ಆತ್ಮಹತ್ಯೆ, ನಿಗಮದ ಹಣದ ಅಕ್ರಮ ವರ್ಗಾವಣೆ ಮತ್ತು ನಿಗಮದಲ್ಲಿನ ಆರ್ಥಿಕ ಅವ್ಯವಹಾರಗಳ ಕುರಿತು ಎಸ್ಐಟಿ ತನಿಖೆ ನಡೆಸುತ್ತಿದೆ.

