ಬೆಂಗಳೂರು : ಕೊಳೆಗೇರಿ ಪ್ರದೇಶದಲ್ಲಿ ವಾಸವಾಗಿರುವ ಎಲ್ಲಾ ಫಲಾನುಭವಿಗಳಿಗೆ 2024ನೇ ಡಿಸೆಂಬರ್ ಅಂತ್ಯದೊಳಗಾಗಿ ಮನೆಗಳನ್ನು ಹಸ್ತಾಂತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರು ಸೂಚಿಸಿದ್ದಾರೆ. 

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು, ಸರ್ಕಾರದ ಆದೇಶದನ್ವಯ ರಾಜ್ಯಾದ್ಯಂತ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳು ಮಾಲೀಕತ್ವದಲ್ಲಿರುವ 1821 ಘೋಷಿತ ಕೊಳಗೇರಿ ಪ್ರದೇಶಗಳಲ್ಲಿ ವಾಸವಾಗಿರುವ 3.36 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ಪರಿಶೀಲಿಸಿದರು. 

ಮಂಡಳಿಯಿಂದ ಕೊಳಗೇರಿ ನಿವಾಸಿಗಳ ಸಮೀಕ್ಷೆ ಕಾರ್ಯಕೈಗೊಂಡು ಈವರೆವಿಗೂ 68,415 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಹಕ್ಕುಪತ್ರಗಳ ವಿತರಣೆ ಪ್ರಕ್ರಿಯೆಯು ಮಂದಗತಿಯಲ್ಲಿರುವುದನ್ನು ಗಂಭೀರವಾಗಿ ಪರಿಗಣಿಸಿ ಹಾಜರಿದ್ದ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರ್ಕಾರವು ನಿಗಧಿಪಡಿಸಿರುವ ಕಾಲಾಮಿತಿಯೊಳಗೆ ಎಲ್ಲಾ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಕೂಡಲೇ ಕ್ರಮವಹಿಸಲು ಸೂಚಿಸಿದರು. ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ನಿಯಮಗಳನ್ವಯ ಶಿಸ್ತಿನ ಕ್ರಮ ಜರುಗಿಸುವುದಾಗಿ ತಿಳಿಸಿದರು.

ಮಂಡಳಿ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ್ (ಸರ್ವರಿಗೂ ಸೂರು) ಯೋಜನೆಯಡಿ 1,80,253 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಕೈಗೆತ್ತಿಕೊಂಡು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಕಾಮಗಾರಿಗಳ ಭೌತಿಕ ಮತ್ತು ಆರ್ಥಿಕ ಪ್ರಗತಿಯ ಬಗ್ಗೆ ಪರಿಶೀಲಿಸಿದರು. ಇದರ ಪೈಕಿ ಈಗಾಗಲೇ ಪೂರ್ಣಗೊಂಡಿರುವ 36,789 ಮನೆಗಳನ್ನು ಮುಖ್ಯಮುಂತ್ರಿಯವರ ಅಮೃತ ಹಸ್ತದಿಂದ 2024 ನೇ ಮಾರ್ಚ್ 2 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಗರೇಶ್ವರ ನಾಗೇನಹಳ್ಳಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದ್ದಾರೆ ಎಂದು ತಿಳಿಸಿದರು.

ಜುಲೈ 2024ರ ಅಂತ್ಯದೊಳಗೆ 34,744 ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಮುಂಬರುವ ದಿವಸಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷ ಕಾರ್ಯಕ್ರಮದ ಮೂಲಕ ಈ ಮನೆಗಳನ್ನು ಮುಖ್ಯಮಂತ್ರಿಯವರ ಅಮೃತ ಹಸ್ತದಿಂದ ಲೋಕರ್ಪಾಣೆ ಮಾಡುವ ಗುರಿ ಹೊಂದಲಾಗಿದೆ. ಆದ್ದರಿಂದ ಸದರಿ ಕಾಮಗಾರಿಗಳನ್ನು ಅತ್ಯಂತ ತ್ವರಿತವಾಗಿ ಚುರುಕುಗೊಳಿಸಲು ವಿಭಾಗ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿಗಳನ್ನು ಟೆಂಡರ್ ಕರಾರಿನಂತೆ ನಿಗಧಿತ ಅವಧಿಯೊಳಗೆ ನಿರ್ವಹಿಸುವಲ್ಲಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ನಿಯಮಗಳನ್ವಯ ನೋಟೀಸ್ ಜಾರಿ ಮಾಡಲು ಹಾಗೂ ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾಗುವ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‍ಗೆ ಸೇರ್ಪಡೆಗೊಳಿಸುವ ಬಗ್ಗೆ ಕ್ರಮವಹಿಸಲು ತಿಳಿಸಿದರು.

ಇನ್ನು ಮುಂದೆ ಯಾವುದೇ ರೀತಿಯಲ್ಲಿ ವಿಳಂಬ ಮಾಡದೇ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ತಿಳಿಸಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು 1975ನೇ ಸಾಲಿನಲ್ಲಿ ಸ್ಥಾಪನೆಯಾಗಿ ಸುಮಾರು 50 ವರ್ಷಗಳು ಕಳೆದಿದ್ದು, ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ವಸತಿ ಯೋಜನೆಗಳು ಮತ್ತು ಅಭಿವೃದ್ಧಿ ಕಾಮಗಾರಿಗಳ ಕಾರ್ಯಕ್ರಮವನ್ನು ಕೊಳಗೇರಿ ನಿವಾಸಿಗಳಿಗೆ ಪಾರದರ್ಶಕವಾಗಿ ತಲುಪಿಸುವ ನಿಟ್ಟಿನಲ್ಲಿ ಮಂಡಳಿಯ ಎಲ್ಲಾ ಕಾರ್ಯಚಟುವಟಿಕೆಗಳನ್ನು ಗಣಕೀಕರಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. 

ಸಭೆಯಲ್ಲಿ ಆಯುಕ್ತರಾದ ಡಾ. ಅಶೋಕ್.ಡಿ.ಆರ್. ಮುಖ್ಯ ಇಂಜಿನಿಯರಾದ ಎನ್.ಪಿ.ಬಾಲರಾಜು ಮತ್ತು ತಾಂತ್ರಿಕ ನಿರ್ದೇಶಕರನ್ನೊಳಗೊಂಡಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Author

Leave a Reply

Your email address will not be published. Required fields are marked *