ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ದೆಹಲಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ರಸ್ತೆಗೆ ಇಳಿದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಈ ಕಾರ್ಯಕರ್ತರು ಯತ್ನ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆಪ್ ಹಿರಿಯ ನಾಯಕ ಸೋಮನಾಥ್ ಭಾರ್ತಿ, ದೆಹಲಿ ಅಸೆಂಬ್ಲಿ ಉಪ ಸ್ಪೀಕರ್ ರಾಖಿ ಬಿರ್ಲಾ ಮತ್ತು ಪಂಜಾಬ್ ಸಚಿವ ಹರ್ಜೋತ್ ಸಿಂಗ್ ಬೇನ್ಸ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಪೊಲೀಸ್ ಬಲ ಪ್ರಯೋಗ ಮಾಡುವ ಮೂಲಕ ನಮ್ಮ ಪ್ರತಿಭಟನೆ ತಡೆಯಲು ಸಾಧ್ಯವಿಲ್ಲ. ನಮ್ಮ ಪಕ್ಷದ ಮಹಿಳಾ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ಬಂಧಿಸಲಾಗಿದೆ ಎಂದು ಗೋಪಾಲ್ ರೈ ಸುದ್ದಿ ಗಾರರ ಜೊತೆ ಮಾತನಾಡುತ್ತ ಆರೋಪಿಸಿದರು.
“ದೆಹಲಿ ಪೊಲೀಸರು ಯಾವುದೇ ಕಾರಣವಿಲ್ಲದೆ ಡೆಪ್ಯೂಟಿ ಸ್ಪೀಕರ್ ರಾಖಿ ಬಿರ್ಲಾ ಮತ್ತು ಎಎಪಿಯ ಅನೇಕ ಕಾರ್ಯಕರ್ತರನ್ನು ಮತ್ತು ಅರವಿಂದ್ ಕೇಜ್ರಿವಾಲ್ ಬೆಂಬಲಿಗರನ್ನು ವಶಕ್ಕೆ ಪಡೆದಿದ್ದಾರೆ. ದೆಹಲಿ ಪೊಲೀಸರು ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ಎಎಪಿ ಬೆಂಬಲಿಗರನ್ನು ಬಂಧಿಸುತ್ತಿರುವುದು ಆಘಾತಕಾರಿ” ಎಂದು ಸೋಮನಾಥ್ ಭಾರ್ತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
