ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Minister S Madhu Bangarappa: ಸರ್ಕಾರವು ಬಡವರ ಪರವಾಗಿ ಕಾರ್ಯಕ್ರಮಗಳನ್ನು ಕೊಡುತ್ತಾ ಇದೆ. ಸರ್ಕಾರ ಬಂದ ಮೇಲೆ ಗ್ಯಾರಂಟಿ ಕೊಡುತ್ತಿರುವುದು ನಮ್ಮ ಹೆಮ್ಮೆ. ಬಡವರ ಹೊಟ್ಟೆ ತುಂಬಿಸುವ ಕಾರ್ಯ ಅನ್ನಭಾಗ್ಯ ಯೋಜನೆಯಾಗಿದೆ

ಯಾದಗಿರಿ: ಇಡೀ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಶಿಕ್ಷಣದಲ್ಲಿ ಮೊದಲ ಸ್ಥಾನ ಬರುತ್ತದೆ ಎಂದು ನಾನು ಭರವಸೆಯ ಗ್ಯಾರಂಟಿ ಕೊಡ್ತೇನೆ ಹಾಗೂ ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಎಸ್ ಮಧು ಬಂಗಾರಪ್ಪ ಅವರು ನುಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಅಕ್ಷರ ದಾಸೋಹ- ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜೀ ಫೌಂಡೇಷನ್ ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಯಾದಗಿರಿ ತಾಲೂಕಿನ ಅರಿಕೇರಾ ಕೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2024– 25 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರದಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಕೊಡುತ್ತಾ ಬಂದಿದ್ದೇವೆ. ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 76 ಸಾವಿರ ಶಾಲೆಗಳು ಬರುತ್ತವೆ. ಒಟ್ಟು 60 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡ್ತಾ ಇದ್ದಾರೆ. ಇಂದು ವಾರದಲ್ಲಿ 6 ದಿನ ಮೊಟ್ಟೆ ವಿತರಿಸಲು ಚಾಲನೆ ನೀಡಲಾಗಿದ್ದು, ರಾಜ್ಯದ 57 ಲಕ್ಷ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯುತ್ತಿದ್ದಾರೆ. ಇದಕ್ಕೆ ಅಜೀಂ ಪ್ರೇಮ್ ಜಿ ಫೌಂಡೇಶನ್ ರವರು ಕೈ ಜೋಡಿಸಿದ್ದಾರೆ ಅವರಿಗೆ ಸರ್ಕಾರದ ಪರವಾಗಿ ಧನ್ಯವಾದಗಳು ತಿಳಿಸುತ್ತೇವೆ ಎಂದರು.

ಸರ್ಕಾರದ ಬಂದಾಗ ವಾರಕ್ಕೆ ಒಂದು ಬಾರಿ ಮೊಟ್ಟೆ ಕೊಡುತ್ತಿತ್ತು, ಆನಂತರ ಎರಡು ಬಾರಿ ಕೊಟ್ಟು ಇಂದು ವಾರಕ್ಕೆ ಆರು ದಿನ ಮೊಟ್ಟೆ ಕೊಡುತ್ತದೆ ಎಂದರು.ವಾರದಲ್ಲಿ ಅಜೀಂ ಫ್ರೇಮ್ ಜೀ ಫೌಂಡೇಶನ್ ವತಿಯಿಂದ 2, ಸರ್ಕಾರದ ವತಿಯಿಂದ 4 ಮೊಟ್ಟೆ ಸೇರಿದಂತೆ ಒಟ್ಟು 6 ಮೊಟ್ಟೆ ವಿತರಿಸುತ್ತದೆ ಎಂದರು.

ಸರ್ಕಾರವು ಬಡವರ ಪರವಾಗಿ ಕಾರ್ಯಕ್ರಮಗಳನ್ನು ಕೊಡುತ್ತಾ ಇದೆ. ಸರ್ಕಾರ ಬಂದ ಮೇಲೆ ಗ್ಯಾರಂಟಿ ಕೊಡುತ್ತಿರುವುದು ನಮ್ಮ ಹೆಮ್ಮೆ. ಬಡವರ ಹೊಟ್ಟೆ ತುಂಬಿಸುವ ಕಾರ್ಯ ಅನ್ನಭಾಗ್ಯ ಯೋಜನೆಯಾಗಿದೆ ಎಂದರು.

ಮಕ್ಕಳ ಪೌಷ್ಠಿಕತೆಗೆ ಹೆಚ್ಚು ಒತ್ತು ಕೊಡುತ್ತಿದ್ದು, ಈ ಯೋಜನೆಗೆ ಸರ್ಕಾರವು ಮೂರು ವರ್ಷಕ್ಕೆ 1591 ಕೋಟಿ ರೂಗಳನ್ನು ಖರ್ಚು ಮಾಡುತ್ತಿದ್ದು ಇತಿಹಾಸವಾಗಿದೆ ಎಂದರು.

5 ಸಾವಿರ ಶಿಕ್ಷಕರ ನೇಮಕವನ್ನು ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವರು ನುಡಿದರು .

ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಮಾತನಾಡಿ, ನಾವೆಲ್ಲರೂ ಸೇರಿ ಸಚಿವರಿಗೆ ಧನ್ಯವಾದ ಹೇಳಬೇಕು. ಇವರ ಸತತ ಪ್ರಯತ್ನದ ಫಲವಾಗಿ ಹೆಚ್ಚುವರಿಯಾಗಿ 2 ದಿನದ ಬದಲಾಗಿ 6 ದಿನ ನೀಡಲು ಚಾಲನೆ ನೀಡಲು ನಮ್ಮ ಜಿಲ್ಲೆಗೆ ಬಂದು ಉದ್ಘಾಟನೆ ಮಾಡಿದ್ದು ಸಂತೋಷ ತಂದ ಸಂಗತಿಯಾಗಿದೆ. ಇವತ್ತು ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುತ್ತಿದೆ.ದೇಶದ ಭವಿಷ್ಯದ ಮಕ್ಕಳ ಕೈಯಲ್ಲಿದೆ. ಎಲ್ಲಾ ಮಕ್ಕಳನ್ನು ಶಾಲೆಗೆ ಬರುವಂತೆ ಮಕ್ಕಳಿಗೂ, ಪೋಷಕರಿಗೆ ಮನವೊಲಿಸಬೇಕು ಎಂದರು.

ಕಾರ್ಯಕ್ರಮಕ್ಕೂ ಮುಂಚೆ ಸಚಿವರು, ಶಾಸಕರು ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸವಿದರು.

ಈ ಸಂದರ್ಭದಲ್ಲಿ ಶಾಸಕರಾದ ಶರಣಗೌಡ ಕಂದಕೂರ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ, ವಿಧಾನ ಪರಿಷತ್ ಶಾಸಕ ಶಶೀಲ್ ಜಿ ನಮೋಶಿ, ಅಜೀಂ ಪ್ರೇಮ್ ಜಿ ಫೌಂಡೇಶನ್ ಮುಖ್ಯಸ್ಥ ರುದ್ರೇಶ ಎಸ್, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೇಶ ಕುಮಾರ ಸಿಂಗ್, ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ ಕಾವೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಪಿಎಂ ಪೋಷಣ್ ನಿರ್ದೇಶಕರಾದ ಸಿಂಧು ಬಿ ರೂಪೇಶ್, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಎಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Author

error: