ವಿರೋಧ ಪಕ್ಷದ ನಾಯಕರ ಧ್ವನಿ ಕುಗ್ಗಿಸಲು ಕೊವಿಡ್ ಆರೋಪ: ಬಸವರಾಜ ಬೊಮ್ಮಾಯಿ

Basavaraj Bommai: ತಮ್ಮ ಮೇಲಿನ ಆರೋಪ ಮರೆಮಾಚಲು ವಿರೊಧ ಪಕ್ಷವನ್ನು ದಮನ ಮಾಡಿ, ವಿರೋಧ ಪಕ್ಷದ ನಾಯಕರ ಧ್ವನಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಆಗುವುದಿಲ್ಲ.

ಹುಬ್ಬಳ್ಳಿ: ಶಿಗ್ಗಾವಿ ಉಪ ಚುನಾವಣೆಯಲ್ಲಿ ಹಣ ಹಂಚುವುದರಲ್ಲಿ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ಶುರುವಾಗಿದೆ‌ ಸಮುದಾಯ ವಾರು ಶಾಸಕರು ಹಣ ಹಂಚಿಕೆ ಮಾಡುತ್ತಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಹಂಚುವುದನ್ನು ನೋಡಿರಲಿಲ್ಲ‌ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಉಪ ಚುನಾವಣೆ ಬಿಜೆಪಿ ವರ್ಸಸ್ ಬೊಮ್ಮಾಯಿ, ಸರ್ಕಾರದಿಂದ ಲೂಟಿ ಮಾಡಿದ ಹಣವನ್ನು ಇಲ್ಲಿ ಹಂಚುತಿದ್ದಾರೆ ಎಂದು ಹೇಳಿದರು.

ಹಾನಗಲ್ ರೈತ ಆತ್ಮಹತ್ಯೆ ಮಾಡಿಕೊಂಡುವುದನ್ನು ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರೈತನ ಪಹಣಿಯಲ್ಲಿ ವಕ್ಪ್ ಆಸ್ತಿ ಎಂದು ನಮೂದಾಗಿದೆ. ಅದನ್ನು ತೆಗೆಸಲು ಆ ರೈತ ನಾಲ್ಕೈದು ವರ್ಷ ಅಲೆದಾಡಿದ್ದಾರೆ‌. ವಕ್ಪ್ ಗೆ ಹೋದರೂ ಅಲ್ಲಿ ನ್ಯಾಯ ಸಿಗುವುದಿಲ್ಲ‌ ಅಂತ ಗೊತ್ತಾಗಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಅವರ ಕುಟುಂಬದವರು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬರೆದುಕೊಟ್ಟಿದ್ದಾರೆ ಎಂದು ಹೇಳಿದರು.

ರೈತರಿಗೆ ನೊಟಿಸ್ ಕೊಟ್ಟಿರುವುದನ್ನು ವಾಪಸ್ ಪಡೆಯುವುದು ಕಣ್ಣೊರೆಸುವ ತಂತ್ರ. ಎಲ್ಲಿಯವರೆಗೆ ಗೆಜಟ್ ನೊಟಿಫಿಕೇಶನ್ ವಾಪಸ್ ಪಡೆಯುವುದಿಲ್ಲವೋ ಅಲ್ಲಿಯವರೆಗೆ ರೈತರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಹೇಳಿದರು.

ಕಾನೂನು ಪ್ರಕಾರ ಪಿಪಿಇ ಕಿಟ್ ಖರೀದಿ :

ಕೊವಿಡ್ ಹಗರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೊವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಇರಲಿಲ್ಲ. ಜನ ಸಾಯುತ್ತಿದ್ದರು. ಆರೋಗ್ಯ ತುರ್ತುಪರಿಸ್ಥಿತಿ ಇತ್ತು‌. ವೈದ್ಯರು ಪಿಪಿಇ ಕಿಟ್ ಇಲ್ಲದಿದ್ದರೆ ಕೆಲಸ ಮಾಡಲು ಆಗುವುದಿಲ್ಲ ಎಂದು ಹೇಳಿದರು. ಪಿಪಿಇ ಕಿಟ್ ಇಲ್ಲದಿದ್ದರೆ ಸಾಯುತ್ತಾರೆ ಎಂಬ ಭಯ ಇತ್ತು. ಆಗ ಎಲ್ಲಿ ಸಿಗುತ್ತವೆ ಎಂದು ತಿಳಿದು ಖರಿದಿ ಮಾಡಿದ್ದೇವು. ರಾಷ್ಟ್ರೀಯ ವಿಪತ್ತು ಅಂತ ಘೊಷಣೆ ಮಾಡಲಾಗಿತ್ತು‌. ಜನರ ಪ್ರಾಣ ಉಳಿಸಲು ನಿರ್ಣಯ ತೆಗೆದುಕೊಂಡಿದ್ದೇವು. ಅದು ಕಾನೂನು ಪ್ರಕಾರವೇ ಆಗಿದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲು ಮಾಡುತ್ತಿದ್ದಾರೆ. ವರದಿ ಸಲ್ಲಿಕೆಯಾಗಿ ಸರ್ಕಾರ ಇನ್ನೂ ಸ್ವೀಕರಿಸಿಲ್ಲ‌ ಅದನ್ನು ಲೀಕ್ ಮಾಡಿದ್ದಾರೆ‌‌.

ತಮ್ಮ ಮೇಲಿನ ಆರೋಪ ಮರೆಮಾಚಲು ವಿರೊಧ ಪಕ್ಷವನ್ನು ದಮನ ಮಾಡಿ, ವಿರೋಧ ಪಕ್ಷದ ನಾಯಕರ ಧ್ವನಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಆಗುವುದಿಲ್ಲ ಎಂದು ಹೇಳಿದರು.

Author

error: