ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಪ್ರಕರಣದ ವಿಚಾರಣೆ ಇಂದು ಸರ್ವೋಚ್ಚ ನ್ಯಾಯಾಲಯದ ಮುಂದೆ ಬರಲಿದೆ. ಈ ಪ್ರಕರಣ ಕುರಿತು ದೆಹಲಿ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ತಮ್ಮ ಬಂಧನವೇ ಕಾನೂನು ಬಾಹಿರ ಎಂಬುದು ಕೇಜ್ರಿವಾಲ್ ಅವರ ವಾದವಾಗಿತ್ತು. ಆದರೆ ದೆಹಲಿ ಹೈಕೋರ್ಟ್ ಈ ವಾದವನ್ನು ಒಪ್ಪಲಿಲ್ಲ. ಅವರ ಬಂಧನದಲ್ಲಿ ಕಾನೂನು ಬಾಹಿರವಾದದ್ದು ಏನೂ ಇಲ್ಲ ಎಂದು ನ್ಯಾಯಾಲಯ ಹೇಳಿತ್ತು.
ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಟೈಮಿಂಗ್ ಕುರಿತು ಎತ್ತಲಾದ ಪ್ರಶ್ನೆಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದರ ಹಿಂದೆ ರಾಜಕೀಯ ಕಾರಣಗಳಿವೆ ಎಂಬ ವಾದಕ್ಕೂ ಪುರಸ್ಕಾರ ದೊರಕಿರಲಿಲ್ಲ.
ಇಡಿ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ ಎಂಬ ಆರೋಪವನ್ನೂ ಒಪ್ಪದ ನ್ಯಾಯಾಲಯ ಇಡಿ ಒಂದು ಸ್ವತಂತ್ರ ಸಂಸ್ಥೆ ಎಂದು ಹೇಳಿತ್ತು. ಇದರಿಂದಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ನ್ಯಾಯಾಲಯದಲ್ಲಿ ಬಹುದೊಡ್ಡ ಸೋಲಾಗಿತ್ತು.
ಇಂದು ಸುಪ್ರೀಂ ಕೋರ್ಟ್ ಮುಂದೆ ಈ ವಿಚಾರ ವಿಚಾರಣೆಗೆ ಬರಲಿದ್ದು ಇದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
