ಬೆಂಗಳೂರು: ಚಿತ್ರದರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಬಂಧಿತರು ನಟ ದರ್ಶನ್ ಹೆಸರು ಬಾಯಿಬಿಟ್ಟಿದ್ದರೆನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಒಟ್ಟು 10 ಜನರನ್ನು ಬಂಧನಕ್ಕೊಳಪಡಿಸಲಾಗಿದೆ.
ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಗಳನ್ನು ಕಳಿಸಿದ್ದ ಕಾರಣಕ್ಕೆ ರೇಣುಕಸ್ವಾಮಿಯವರ ಕೊಲೆ ನಡೆದಿದ್ದು, ದರ್ಶನ್ ಅವರ ಮೌಖಿಕ ಆದೇಶದ ಮೇಲೆ ಆರೋಪಿಗಳು ಈ ಹತ್ಯೆಯನ್ನು ನಡೆಸಿದ್ದಾರೆಂದು ಹೇಳಲಾಗಿದೆ.
ದರ್ಶನ್ ಜೊತೆಗೆ ಆತ್ಮೀಯ ಸಂಪರ್ಕ ಹೊಂದಿದ್ದ ನಟಿ ಪವಿತ್ರಾ ಗೌಡ, ಈ ಬಗ್ಗೆ ದರ್ಶನ್ ಅವರಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದರು. ಇದರಿಂದ ಕುಪಿತರಾಗಿದ್ದ ನಟ ದರ್ಶನ್ ರೇಣುಕಾಸ್ವಾಮಿ ಬಗ್ಗೆ ಕೋಪ ತಾಳಿದ್ದರು.
ಚಿತ್ರದರ್ಗದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಇತ್ತೀಚಿಗಷ್ಟೇ ಮದುವೆಯಾಗಿದ್ದು, ಪತ್ನಿ ಗರ್ಭಿಣಿಯಾಗಿದ್ದಾರೆ. ಸಾಮಾಜಿಕ ಜಾಲತಾಣ ಬಳಸುತ್ತಿದ್ದ ರೇಣುಕಾಸ್ವಾಮಿ ಪವಿತ್ರಗೌಡಗೆ ಅಶ್ವೀಲವಾಗಿ ಮೆಸೇಜ್, ಕಮೆಂಟ್ ಮಾಡಿದ್ದ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.






