ಉಡುಪಿ: ವಿಧಾನಪರಿಷತ್ತಿನ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪಕ್ಷದ‌ ಶಿಸ್ತಿನ ಸಿಪಾಯಿ ಆಗಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಚುನಾವಣಾ ಉಸ್ತುವಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಪಕ್ಷದ ‌ಶಿಸ್ತಿನ ಸಿಪಾಯಿಗಳಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ ಎಂದರು.

ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ನಮಗೆ ಉತ್ತಮ ಅವಕಾಶವಿದೆ. ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 6,300 ಮಂದಿ ಮತದಾರರಿದ್ದಾರೆ. ಅವರನ್ನು ನೇರವಾಗಿ ಭೇಟಿಯಾಗಿ ಪಕ್ಷದ ಬಗ್ಗೆ ತಿಳುವಳಿಕೆ ಮೂಡಿಸುವ ಕೆಲಸ ಮಾಡೋಣ ಎಂದು ಹೇಳಿದರು.

ರಾಜಕೀಯವಾಗಿ ಈ ಚುನಾವಣೆ ಮುಖ್ಯವಾಗಿದೆ. ಕಾರ್ಯಕರ್ತರೇ ನಮಗೆ ಸ್ಫೂರ್ತಿ. ನಮ್ಮ‌ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೆ ರಾಜು ಪೂಜಾರಿ ಅವರ ಗೆಲುವು ಶತಸಿದ್ದ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹರಿಯಾಣ ವಿಧಾನಸಭಾ ಚುನಾವಣೆ ವೇಳೆ ರಾಷ್ಟ್ರೀಯ ಚಾನೆಲ್ ಗಳು ಸಮೀಕ್ಷೆ, ವರದಿಗಳು ಕೂಡ ನಮ್ಮ ಪಕ್ಷದ ಪರವಾಗಿದ್ದವು. ಜೊತೆಗೆ ಪೋಸ್ಟಲ್ ಬ್ಯಾಲೆಟ್ ಗಳಲ್ಲಿ ನಮಗೆ ಮುನ್ನಡೆ ಸಿಕ್ಕಿತ್ತು. ಆದರೆ, ಫಲಿತಾಂಶದ ವೇಳೆ ನಮ್ಮ ಲೆಕ್ಕಾಚಾರವೇ ಉಲ್ಟಾ ಆಯಿತು ಎಂದರು.‌

ಕೇಂದ್ರ ಸರ್ಕಾರ ಎಲ್ಲಾ ಕಡೆಯಿಂದಲೂ ಕಾಂಗ್ರೆಸ್ಸಿಗೆ‌ ತೊಂದರೆ ನೀಡುತ್ತ ಬರುತ್ತಿದೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಕಾಂಗ್ರೆಸ್‌ ಸೂಕ್ತ ಉತ್ತರ ನೀಡಲಿದೆ ಎಂದು ಹೇಳಿದ ಸಚಿವರು, ಉತ್ತರ ಭಾರತದಲ್ಲಿ ಕಾಂಗ್ರೆಸ್ ಸೋಲಿನ ನಡುವೆಯೂ ಪುಟಿದೇಳುವ ಕೆಲಸ ಮಾಡುತ್ತಿದೆ. ಈ ಉಪ ಚುನಾವಣೆ ರಾಜ್ಯ ರಾಜಕೀಯದ ಹೊಸ ದಿಕ್ಸೂಚಿಯಾಗಲಿ ಎಂದು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ, ಪ್ರಸಾದ್ ಕಾಂಚನ್, ಎಂ.ಎ. ಗಪೂರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *