ನವದೆಹಲಿ : ರಾಜಧಾನಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೊಡ್ಡ ರಾಜಕೀಯ ಸಂಚು ರೂಪಿಸುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಶುಕ್ರವಾರ ಮಾಡಿದ ಆರೋಪ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದು ಎಎಪಿ ಸರ್ಕಾರವನ್ನು ಉರುಳಿಸುವ ರಾಜಕೀಯ ಪಿತೂರಿಯಾಗಿದೆ. ಮುಂಬರುವ ದಿನಗಳಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುವುದು ಎಂದು ನಮಗೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದು ಬಂದಿದೆ ಎಂದರು.
ಆದರೆ, ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದು ಕಾನೂನುಬಾಹಿರ ಮತ್ತು ಜನರ ಆದೇಶಕ್ಕೆ ವಿರುದ್ಧವಾಗಿದೆ’ ಎಂದು ಅವರು ವಾದಿಸಿದರು.
ಅವರು ರಾಷ್ಟ್ರಪತಿ ಆಡಳಿತ ಹೇರಲಾಗುವುದು ಎಂಬ ಆರೋಪಕ್ಕೆ ನೀಡಿದ ಕಾರಣಗಳು ಹೀಗಿವೆ.
ಇತ್ತೀಚಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆಯನ್ನು ಸೂಚಿಸುವ ಅನೇಕ ಘಟನೆಗಳು ಸಂಭವಿಸಿವೆ. ಕಳೆದ ಕೆಲವು ತಿಂಗಳುಗಳಿಂದ ದೆಹಲಿಯಲ್ಲಿ ಯಾವುದೇ ಹಿರಿಯ ಐಎಎಸ್ ಅಧಿಕಾರಿಯನ್ನು ನಿಯೋಜಿಸಿಲ್ಲ.
‘ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ ಆದರೆ ಯಾವುದೇ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಮಾದರಿ ನೀತಿ ಸಂಹಿತೆಯನ್ನು ಉಲ್ಲೇಖಿಸಿ ಅಧಿಕಾರಿಗಳು ಸಚಿವರು ಕರೆದ ಸಭೆಗಳಿಗೆ ಹಾಜರಾಗುವುದನ್ನು ನಿಲ್ಲಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಅವರು ದೆಹಲಿ ಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ಎಂಎಚ್ಎಗೆ ಪತ್ರಗಳನ್ನು ಬರೆಯುತ್ತಿದ್ದಾರೆ’
‘ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ಈಗಾಗಲೇ ತಿಳಿದಿದೆ. ಎಎಪಿ 2015 ಮತ್ತು 2020ರಲ್ಲಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದೆ. ಅದಕ್ಕಾಗಿಯೇ ಅವರು ದೆಹಲಿ ಸರ್ಕಾರವನ್ನು ಉರುಳಿಸಲು ಬಯಸುತ್ತಾರೆ.
