ನವದೆಹಲಿ : ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಇಂದು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ ಪ್ರಧಾನಿ ಮೋದಿ. ಅವರು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಚಿಕ್ಕಬಳ್ಳಾಪುರದ ಬಳಿಕ ಬೆಂಗಳೂರಿಗೆ ಪ್ರಯಾಣಿಸುವ ಪ್ರಧಾನಿ ಮೋದಿ ಸಂಜೆ 4 ಗಂಟೆಗೆ ಅರಮನೆ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಒಂದು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಈ ಹಿನ್ನಲೆ ವಾಹನ ಸವಾರರಿಗೆ ಅಡಚಣೆಯಾಗದಂತೆ ಸಂಚಾರಿ ಪೊಲೀಸರು ನಗರದ 11 ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಿದ್ದಾರೆ.
ಪ್ಯಾಲೇಸ್ ರಸ್ತೆ, ಜಯಮಹಲ್, ರಮಣಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ರಸ್ತೆ, ಜಯರಾಮ್ ರಸ್ತೆ, ಸಿ ವಿ ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಖ್ರಿ ಸರ್ಕಲ್, ವಸಂತನಗರ, ಬಳ್ಳಾರಿ ರಸ್ತೆ ಮತ್ತು ತರಳಬಾಳು ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಹೀಗಾಗಿ ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.
