ಬೆಂಗಳೂರು: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಮೂಲಕ ನೈಋತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸಿದ್ದು, ದೇಶದಲ್ಲಿ ಮುಂಗಾರು ಆರಂಭಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಆರಂಭಿಕ 2-3 ದಿನಗಳ ಕಾಲ ನೈಋತ್ಯ ಮಾರುತಗಳ ಚಲನೆ ಕೊಂಚ ನಿಧಾನಗತಿಯಲ್ಲಿರಲಿದ್ದು, ಕ್ರಮೇಣ ತೀವ್ರತೆಯನ್ನು ಕಂಡುಕೊಳ್ಳಲಿದೆ ಎಂದು ಇಲಾಖೆ ತಿಳಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ.22 ರವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಕರ್ನಾಟಕದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
