ಮೈಸೂರು : ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಉತ್ಸಾಹದಿಂದ ಶಾಲೆಯತ್ತ ಮುಖ ಮಾಡಿದ್ದಾರೆ. ಈ ಬಾರಿ ಶಾಲಾ ಪಠ್ಯ ಪುಸ್ತಕದಲ್ಲಿ ಯಾವುದೇ ರೀತಿಯಾದ ಪರಿಷ್ಕರಣೆ ಇಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ. ಕೆಲವು ವ್ಯಾಕರಣ ಹಾಗೂ ಪದಗಳ ಬದಲಾವಣೆ ಮಾಡಲಾಗಿದೆ. ತಪ್ಪಿದ್ದನ್ನು ಸರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಶಾಲಾ ಮಕ್ಕಳ ಭವಿಷ್ಯ ಮತ್ತು ಅವರ ಹಿತಾಸಕ್ತಿಯ ದೃಷ್ಟಿಯಿಂದ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಬಿಜೆಪಿ ಸರ್ಕಾರಕ್ಕೆ ಶಿಕ್ಷಕರ ನೇಮಕಾತಿ ಮಾಡುವುದು ಸಹ ಸಾಧ್ಯವಾಗಿರಲಿಲ್ಲ, ಅದನ್ನು ತಮ್ಮ ಸರ್ಕಾರ ಮಾಡಬೇಕಾಯಿತು ಎಂದರು.
ಹಿಂದಿನ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಹೊಲಸೆಬ್ಬಿಸಿದ್ದ ಕಾರಣ ಅವುಗಳ ಪಾವಿತ್ರ್ಯತೆ ಹಾಳಾಗಿತ್ತು, ಎಲ್ಲವನ್ನು ಸ್ವಚ್ಛಗೊಳಿಸುವ ಕೆಲಸ ತಮ್ಮ ಇಲಾಖೆ ಮಾಡುತ್ತಿದೆ ಎಂದು ತಿಳಿಸಿದರು.
