ಸಚಿವ ಜಮೀರ್‌ ಒಕ್ಕಲಿಗರನ್ನು, ಹಿಂದೂಗಳನ್ನು ಖರೀದಿಸುತ್ತೇನೆಂದು ಹೇಳುತ್ತಿದ್ದಾರೆಯೇ..? : ಆರ್‌.ಅಶೋಕ

R Ashok On Zameer Ahamed : ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್‌ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ .

ರಾಮನಗರ : ಸಚಿವ ಜಮೀರ್‌ ಅಹ್ಮದ್‌ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿದ್ದಾರೆಯೇ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು. 

ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್‌ ಅಹ್ಮದ್‌ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಅದೇ ಜಮೀರ್‌ ಅಹ್ಮದ್‌ ಈಗ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎಂದು ಹೇಳಿದ್ದಾರೆ. ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್‌ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ ಎಂದು ಪ್ರಶ್ನೆ ಮಾಡಿದರು. 

ಈಗಾಗಲೇ ಸಚಿವ ಜಮೀರ್‌ ಅಹ್ಮದ್‌ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ? ನಾವು ಮಣ್ಣಿನ ಮಕ್ಕಳಾಗಿದ್ದು, ಇದೇ ನಾಡಿನಲ್ಲಿ ಹುಟ್ಟಿ ಬೆಳೆದಿದ್ದೇವೆ. ಚುನಾವಣೆ ನಡೆಯುವ ಸಮಯದಲ್ಲೇ ಕಾಂಗ್ರೆಸ್‌ ಸಚಿವರು ಖರೀದಿ ಬಗ್ಗೆ ಮಾತನಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹಿಂದೆ ಇದ್ದ ರೌಡಿಗಳು ನಾಚುವಂತೆ ಅಬಕಾರಿ ಇಲಾಖೆಯ ಮೂಲಕ ಮದ್ಯ ಮಾರಾಟಗಾರರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಕುಟುಂಬ ಖರೀದಿಸುವವರನ್ನು ಚನ್ನಪಟ್ಟಣದ ಜನರು ಕ್ಷಮಿಸುವುದಿಲ್ಲ ಎಂದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ಸೈಟು ಕೊಳ್ಳೆ ಹೊಡೆದು ಅದಕ್ಕಾಗಿ 62 ಕೋಟಿ ರೂ. ನೀಡಿ ಎಂದು ಕೇಳುತ್ತಾರೆ. ಅವರ ಬದುಕಿನ ತೆರೆದ ಪುಸ್ತಕದಲ್ಲಿ ದರೋಡೆಗಳೇ ತುಂಬಿದೆ. ಮೊದಲು ಸೈಟು ಕೊಡಲ್ಲ ಎಂದು ಹೇಳಿ, ಹೋರಾಟ ನಡೆದ ಬಳಿಕ ಸೈಟು ಹಿಂದಿರುಗಿಸಿದ್ದಾರೆ. ತಪ್ಪು ಮಾಡಿದ್ದಕ್ಕೆ ಸೈಟು ವಾಪಸ್‌ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಲೂಟಿ ಮಾಡಿದ್ದು, ಅದರಲ್ಲಿ 87 ಕೋಟಿ ರೂ. ತಿಂದಿದ್ದೇವೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಇವೆಲ್ಲವನ್ನೂ ಜನರು ಯೋಚನೆ ಮಾಡಿ ಬದಲಾವಣೆ ತರಬೇಕು. ನಿಖಿಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

Author

error: