ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಶಂಕಿತರಾದ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಎನ್ನಲಾದ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತರನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು.
ಇಬ್ಬರು ಶಂಕಿತರನ್ನು ಎನ್ಐಎ ಅಧಿಕಾರಿಗಳು ಮಂಡಿವಾಳದ ಎಫ್ಎಸ್ಎಲ್ ಸೆಂಟರ್ ಬಳಿಯಿರುವ ಇಂಟ್ರಾಗೇಷನ್ ಸೆಲ್ನಲ್ಲಿ ವಿಚಾರಣೆ ನಡೆಸಿದರು. ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಶಂಕಿತರನ್ನು ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು 10 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.
ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಐಟಿ ಕಾರಿಡಾರ್ ಕುಂದಲ ಹಳ್ಳಿ ಕಾಲೋನಿಯಲ್ಲಿರುವ ದಿ ರಾಮೇಶ್ವರ ಕೆಫೆಗೆ ಗ್ರಾಹಕನ ತೆರಳಿ ಟಿಫನ್ ಬಾಕ್ಸ್ ಬ್ಯಾಗ್ ನಲ್ಲಿ ಬಾಂಬ್ ಇಟ್ಟು ಮುಸಾವೀರ್ ಪರಾರಿಯಾಗಿದ್ದ. ಬಾಂಬ್ ಸ್ಫೋಟದ ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಕೃತ್ಯದ ಹಿಂದೆ ಭಯೋತ್ಪಾದಕ ಸಂಘಟನೆ ಕೈವಾಡ ಇರುವುದು ಖಚಿತವಾದ ಹಿನ್ನೆಲೆಯಲ್ಲಿ ಎನ್ಐಎ ಮಧ್ಯಪ್ರವೇಶಿಸಿತ್ತು. ಅಷ್ಟರಲ್ಲಿ ಶಂಕಿತ ಉಗ್ರರ ಜಾಡು ಹಿಡಿಯುವಲ್ಲಿ ಸಿಸಿಬಿ ಪೊಲೀಸರು ಕೂಡ ಯಶಸ್ಸು ಕಂಡಿದ್ದರು.
.







