ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಬದಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಬಲಿಯಾದವರಿಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಈಗಾಗಲೇ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿ; ಪರಿಹಾರ ಕಾರ್ಯ, ಮೃತರ ಕುಟುಂಬಗಳಿಗೆ ನೆರವು ಇತ್ಯಾದಿ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇನ್ನೂ ಹಲವೆಡೆ ಭೂಕುಸಿತವಾಗುವ ಆತಂಕವಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ಧಾರುಣ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವರು ಶೋಕ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಬದಿ ಸಣ್ಣಪುಟ್ಟ ಗೂಡಂಗಡಿ, ಹೋಟೆಲ್ ಇಟ್ಟುಕೊಂಡು ಬದುಕು ಕಟ್ಟಿಕೊಂಡಿರುವ ಜನತೆಯಲ್ಲಿ ಕಳಕಳಿಯ ಮನವಿ ಮಾಡಿರುವ ಸಚಿವ ಕುಮಾರಸ್ವಾಮಿ ಅವರು, ಮಳೆಗಾಲ, ಇನ್ನಿತರೆ ಅಪಾಯಕಾರಿ ಸಂದರ್ಭಗಳಲ್ಲಿ ಭೂ ಕುಸಿತದ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು. ರಸ್ತೆಬದಿ ಗುಡ್ಡಗಳ ಕೆಳಗೆ ವಾಸಿಸುವ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಳ್ಳುವವರು ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

Author

Leave a Reply

Your email address will not be published. Required fields are marked *