ಬೆಂಗಳೂರು: ರಾಜ್ಯದ ಹಲವಡೆ ವರ್ಷಧಾರೆ ಅಬ್ಬರಿಸುತ್ತಿದೆ. ಇದೇ ಮೇ 31ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ಮಳೆಯು ಕೇರಳದ ಮೂಲಕ ರಾಜ್ಯವನ್ನು ಪ್ರವೇಶಿಸಲಿದೆ. ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಗಾರು ಮಳೆ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವುದರಿಂದ ಸಹಜವಾಗಿಯೇ ರೈತರಲ್ಲಿ ಸಂತಸ ಮನೆ ಮಾಡಿದೆ.
ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ರಾಜ್ಯದಲ್ಲಿ ಮುಂಗಾರು ಆಗಮನವು ಕೊಂಚ ಮುಂದಕ್ಕೆ ಹೋಗಲಿದೆ. ನೈರುತ್ಯ ಮುಂಗಾರು ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ.
ಮೇ 31ರವರೆಗೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾರವಾರದ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಿದೆ.
